ನಟ ಯಶ್ ನೋಡುವ ಆತುರದಲ್ಲಿ ಬೈಕ್ ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ಅಭಿಮಾನಿ ಸಾವು

Gadag : ಮೂವರು ಅಭಿಮಾನಿಗಳ ಸಾವಿನ್ನಪ್ಪಿದ ದುರ್ಘಟನೆ ಮಾಸುವ ಮುನ್ನವೇ ರಾಕಿಂಗ್ ಸ್ಟಾರ್ ಯಶ್ ಅವರ ಮತ್ತೋರ್ವ ಅಭಿಮಾನಿ ಕೂಡ ಇಂದು ಮೃತಪಟ್ಟಿದ್ದಾರೆ.
ಗದಗ ಜಿಲ್ಲೆ ಸೊರಣಗಿ ಗ್ರಾಮದಲ್ಲಿನ ಮೃತ ಅಭಿಮಾನಿಗಳ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಅಲ್ಲಿಂದ ಗದುಗಿಗೆ ತೆರಳಿ ಅಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಭಿಮಾನಿಗಳ ಆರೋಗ್ಯ ವಿಚಾರಿಸಿದ ನಟ ಯಶ್ ಹುಬ್ಬಳ್ಳಿ ಕಡೆಗೆ ಪ್ರಯಾಣ ಬೆಳೆಸಿದ್ದರು. ಯಶ್ ಹುಬ್ಬಳ್ಳಿಗೆ ವಾಪಸ್ಸಾಗುವಾಗ ತನ್ನ ಬೈಕಿನಲ್ಲಿ ಯಶ್ ವಾಹನ ಫಾಲೋ ಮಾಡಲು ಮುಂದಾಗಿದ್ದ ಗದಗನ ಬಿಂಕದಕಟ್ಟಿ ನಿವಾಸಿ 22 ವರ್ಷದ ನಿಖಿಲ್ ಗೌಡ್ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಭೀಕರ ಅಪಘಾತಕ್ಕೆ ತುತ್ತಾಗಿದ್ದನು. ಅಪಘಾತದಲ್ಲಿ ನಿಖಿಲ್ ತಲೆಗೆ ಪೆಟ್ಟು ಬಿದ್ದು ಗಂಭೀರ ಗಾಯಗೊಂಡಿದ್ದ. ಕೂಡಲೇ ಆತನನ್ನು ಕೂಡ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೇ ನಿಖಿಲ್ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾನೆ. ಮೃತನನ್ನು ನಿಖಿಲ್ ಗೌಡ ಅಗಡಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದನು. ಸದ್ಯ ಆಸ್ಪತ್ರೆ ಬಳಿ ನಿಖಿಲ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.


