ನಟ ಯಶ್ ಬರ್ತ್ ಡೇ ಬ್ಯಾನರ್ ಕಟ್ಟುವ ವೇಳೆ ವಿದ್ಯುತ್ ಅವಘಡ; ಮೂವರು ಸ್ಥಳದಲ್ಲೇ ಸಾವು
ನಟ ಯಶ್ ಹುಟ್ಟುಹಬ್ಬಕ್ಕೆ ಬೃಹತ್ ಗಾತ್ರದ ಕಟೌಟ್ ಕಟ್ಟುವ ವೇಳೆ ವಿದ್ಯುತ್ ಸ್ಪರ್ಶ ಉಂಟಾಗಿ ಇದರಿಂದಾಗಿ 3 ಜನ ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿರುವಂತಹ ದುರ್ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ.
ಇನ್ನು ಮೃತ ಯುವಕರನ್ನು 24 ವರ್ಷದ ಹನುಮಂತ ಹರಿಜನ್, 20 ವರ್ಷದ ಮುರಳಿ ನಡುವಿನಮನಿ, ಹಾಗೂ 20 ವರ್ಷದ ನವೀನ್ ಗಾಜಿ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮಂಜುನಾಥ್, ಪ್ರಕಾಶ್ ಹಾಗೂ ಹನುಮಂತ ಎಂಬವರಿಗೆ ಗಂಭೀರ ಗಾಯಾಳಾಗಿವೆ. ಮಧ್ಯರಾತ್ರಿ 1 ಗಂಟೆ ವೇಳೆ ಕಟೌಟ್ ಕಟ್ಟುವ ವೇಳೆ ಈ ದುರ್ಘಟನೆ ನಡೆದಿದೆ. ಘಟನೆ ನಂತರ ಗ್ರಾಮಸ್ಥರು ಗಾಯಾಳುಗಳನ್ನು ಲಕ್ಷ್ಮೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಮಧ್ಯರಾತ್ರಿ ವೇಳೆ, ಹತ್ತಾರು ಜನ ಯುವಕರು ಸೇರಿಕೊಂಡು ತಮ್ಮ ನೆಚ್ಚಿನ ನಟನ ಕಟೌಟ್ ಕಟ್ಟಲು ಮುಂದಾಗಿದ್ದಾರೆ. ರಾತ್ರಿ ಸಮಯ ಆಗಿದ್ದರಿಂದ ವಿದ್ಯುತ್ ತಂತಿ ಯುವಕರ ಗಮನಕ್ಕೆ ಬಂದಿಲ್ಲ. ಇದರಿಂದ ಈ ದುರ್ಘಟನೆ ಸಂಭವಿಸಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಸೂತಕದ ಛಾಯೆ ಮನೆ ಮಾಡಿದೆ.
ಈ ಸಂಬಂಧ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




