77ನೇ ಗಣರಾಜ್ಯೋತ್ಸವ ದಿನಾಚರಣೆ: ಜಿಲ್ಲಾಡಳಿತ ಭವನದಲ್ಲಿ ರಾಷ್ಟ್ರ ಧ್ವಜಾರೋಹಣ

77ನೇ ಗಣರಾಜ್ಯೋತ್ಸವ ದಿನಾಚರಣೆ: ಜಿಲ್ಲಾಡಳಿತ ಭವನದಲ್ಲಿ ರಾಷ್ಟ್ರ ಧ್ವಜಾರೋಹಣ
ಸಂವಿಧಾನ ಪ್ರಜಾಪ್ರಭುತ್ವದ ಆತ್ಮ: ಡಾ.ಸುರೇಶ ಬಿ.ಇಟ್ನಾಳ
ಕೊಪ್ಪಳ ಜನವರಿ 26, ಸಂವಿಧಾನವು ಪ್ರಜಾಪ್ರಭುತ್ವದ ಆತ್ಮವಾಗಿದ್ದು, ನಾವೆಲ್ಲರೂ ಸಂವಿಧಾನದ ಮೌಲ್ಯಗಳನ್ನು ಅರಿತುಕೊಂಡು ದೇಶದ ಅಭಿವೃದ್ಧಿಗೆ ಒತ್ತು ನೀಡೋಣ ಎಂದು ಜಿಲ್ಲಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ ಹೇಳಿದರು.
ಅವರು ಸೋಮವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ನಡೆದ 77ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ನಮ್ಮೆಲ್ಲರಿಗೂ ಗೊತ್ತಿರುವ ಹಾಗೆ 1947ರ ಆಗಸ್ಟ್ 15ರಂದು ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿತು. 1950ರ ಜನವರಿ 26 ರಂದು ಸಂವಿಧಾನವನ್ನು ಜಾರಿಗೆ ತರಲಾಯಿತು. ಇದರ ಹಿನ್ನೆಲೆಯನ್ನು ನೋಡುವುದಾದರೆ, ಬ್ರಿಟಿಷರ ಕಾಲದಲ್ಲಿ ನಮ್ಮದೇ ಸಂವಿಧಾನ ಇರಲಿಲ್ಲ. ನಮ್ಮದೇ ಸಂವಿಧಾನ ತರುವ ಪ್ರಯತ್ನವಾಗಿ 1929ರ ಲಾಹೋರ್ ಅಧಿವೇಶನದಲ್ಲಿ ಪೂರ್ಣ ಸ್ವರಾಜ್ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು. 1930 ಜನವರಿ 26 ರಂದು ಪೂರ್ಣ ಸ್ವರಾಜ್ ಘೋಷಣೆ ಮಾಡಲಾಯಿತು. ಪ್ರಜೆಗಳಿಂದ, ಪ್ರಜೆಗಳಿಗಾಗಿ ಮತ್ತು ಪ್ರಜೆಗಳಿಗೋಸ್ಕರ ಪ್ರಜಾಪ್ರಭುತ್ವ ತರುವ ಧ್ಯೇಯದಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ ನೇತೃತ್ವದಲ್ಲಿ ಸಂವಿಧಾನ ಕರಡು ರಚನಾ ಸಮಿತಿಯನ್ನು ರಚಿಸಲಾಯಿತು. ಸುಮಾರು 2 ವರ್ಷ 11 ತಿಂಗಳು 18 ದಿವಸ ಜಗತ್ತಿನ ಎಲ್ಲ ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿದ ನಂತರ ಅಂಬೇಡ್ಕರ್ ಅವರು ಬೃಹತ್ ಸಂವಿಧಾನವನ್ನು ರಚಿಸಿದರು. 1949 ನವೆಂಬರ್ 26 ರಂದು ಸಂವಿಧಾನವನ್ನು ಅಂಗೀಕರಿಸಲಾಯಿತು. 1950 ಜನವರಿ 26 ರಂದು ಸಂವಿಧಾನವನ್ನು ಜಾರಿಗೆ ತರಲಾಯಿತು. ಸಂವಿಧಾನ ಪ್ರಜಾಪ್ರಭುತ್ವದ ಆತ್ಮ. ನಮ್ಮ ಸಂವಿಧಾನವು ಸಮಾನತೆ, ಭ್ರಾತೃತ್ವ, ವ್ಯಕ್ತಿಗೌರವ ಮತ್ತು ಅಭಿವ್ಯಕ್ತಿ ಸ್ವಾತಂತ್ರö್ಯವನ್ನು ಒಳಗೊಂಡಿದ್ದು, ಜಗತ್ತಿನ ಎಲ್ಲ ಸಂವಿಧಾನಗಳಿಗಿಂತ ಶ್ರೇಷ್ಠ ಮೌಲ್ಯಗಳನ್ನು ನಮ್ಮ ಸಂವಿಧಾನ ಹೊಂದಿದೆ. ನಾವೆಲ್ಲರೂ ಸಂವಿಧಾನದ ಮೌಲ್ಯಗಳನ್ನು ಅರಿತು ದೇಶದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿ.ಪಂ ಉಪ ಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರ್, ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ಅಮೀನ್ ಅತ್ತಾರ, ಆಹಾರ ಇಲಾಖೆ ಉಪನಿರ್ದೇಶಕ ಸೋಮಶೇಖರ ಬಿರಾದರ್, ಜಿಲ್ಲಾ ತರಬೇತಿ ಕೇಂದ್ರದ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಗೌತಮ್ ಯಾದವ್ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ 8867257737




